Karnataka
oi-Mallika P

ಬೆಂಗಳೂರು, ಜೂನ್ 27: ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಪುಲಿಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇಪಾಳದ ಪಾರಸ್ (19) ಹಾಗೂ ತಮಿಳುನಾಡಿನ ಯೂಸೂಪ್ ಖಾನ್ (19) ಮೃತ ಯುವಕರು ಎಂದು ಗುರುತಿಸಲಾಗಿದೆ.
ಮೃತ ಯುವಕರು ಉದ್ಯೋಗ ಅರಸಿ ಪ್ರತ್ಯೇಕವಾಗಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಪಾರಸ್ ಹಾಗೂ ಯೂಸೂಪ್ ಕೆಲಸ ಮುಗಿಸಿ ಸೋಮವಾರ ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಎಂ.ಎಂ. ರಸ್ತೆ ಮೂಲಕ ಮನೆಯತ್ತ ಹೊರಟಿದ್ದರು. ಒನ್ ವೇ ಆಗಿದ್ದರಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗವಾಗಿ ಬಂದಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದ ಪಾರಸ್ ಹಾಗೂ ಯೂಸೂಪ್ ಮೇಲೆಯೇ ಲಾರಿಯ ಚಕ್ರ ಹರಿದಿದ್ದು, ತೀವ್ರ ಗಾಯಗೊಂಡು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತಕ್ಕೆ ಕಾರಣವಾದ ಟಿಪ್ಪರ್ ಲಾರಿ ಚಾಲಕ ಸುನೀಲ್ ಬಾಬು ರಾಥೋಡ್ನನ್ನು (23) ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಉದ್ದೇಶ ಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಚಾರ್ಮಾಡಿ ಘಾಟ್: ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕಪ್ ವಾಹನ
ಚಿಕ್ಕಮಗಳೂರು: ಮನೆಯ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಚಾರ್ಮಾಡಿ ಘಾಟಿಯ ಆಲೇಖಾನ್ ಹೊರಟ್ಟಿ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ಪಿಕಪ್ ವಾಹನ ಪಲ್ಟಿಯಾಗಿದೆ. ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ, ಎತ್ತರದ ರಸ್ತೆ ಯಿಂದ ಪಿಕಪ್ ಚಕ್ರ ಕೆಳಗಿಳಿಯುತ್ತಿದ್ದಂತೆ ಜಾರಿ ವಾಹನ ಅಪಘಾತಕ್ಕೀಡಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary
Two were died in Bike and tipper accident At Bengaluru.Know more,
Story first published: Tuesday, June 27, 2023, 21:06 [IST]