Last Updated:
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು ಸೋನಿಯಾ ಗಾಂಧಿ.
ನವದೆಹಲಿ(ಜೂ.23): ಭಾರತ ಸದ್ಯ ಗಂಭೀರವಾದ ಗಡಿ ಸಮಸ್ಯೆ ಎದುರಿಸುತ್ತಿದೆ. ಆತಂಕಕಾರಿಯಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಾರಕ ರೋಗ ಕೊರೋನಾ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿದೆ. ಇದೆಲ್ಲದಕ್ಕೂ ನರೇಂದ್ರ ಮೋದಿ ಸರ್ಕಾರ ಅಧಿಕಾರದ ದುರುಪಯೋಗ ಹಾಗೂ ತಪ್ಪು ನೀತಿಗಳು ಕಾರಣ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಆರೋಪಿಸಿದರು.
ಮಂಗಳವಾರ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಸದ್ಯ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ನರೇಂದ್ರ ಮೋದಿ ಸರ್ಕಾರದ ಆಡಳಿತ ವೈಖರಿಯೇ ಕಾರಣ ವಾಗ್ದಾಳಿ ನಡೆಸಿದರು. ಚೀನಾದೊಂದಿಗೆ ಗಡಿಯಲ್ಲಿ ಬಿಕ್ಕಟ್ಟು ಆರಂಭವಾಗಿದೆ. ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಆದಷ್ಟು ಬೇಗ ಸಮರ್ಥವಾಗಿ ನಿಭಾಯಿಸುತ್ತದೆ ಮತ್ತು ದೇಶದ ಸಮಗ್ರತೆ ಕಾಪಡುತ್ತದೆ ಎಂದು ಆಶಿಸುತ್ತೇನೆ ಎಂದರು.
ಲಾಕ್ಡೌನ್ ಮತ್ತು ಕೊರೋನಾ ಕಷ್ಟಕ್ಕೆಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರ್ಥಿಕ ಪ್ಯಾಕೇಜ್ ನಲ್ಲಿ ಏನೇನೂ ಇಲ್ಲ. ಜನರ ಕೈಗೆ ಹಣ ನೀಡಬೇಕಾಗಿತ್ತು. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿಗೆ ನೆರವಾಗಬೇಕಿತ್ತು. ಬೇಡಿಕೆ ಹೆಚ್ಚಿಸುವ ಪ್ರಯತ್ನ ಮಾಡಬೇಕಿತ್ತು. ಆದರೆ ಯಾವ ರೀತಿಯಲ್ಲೂ ಉಪಯೋಗಕ್ಕೆ ಬಾರದ ನಾಮಕಾವಸ್ತೆ ಪ್ಯಾಕೇಜ್ ಮಾಡಲಾಗಿದೆ ಎಂದು ಆರೋಪಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.














