Ramanagara
lekhaka-Ramesh Ramakirshna
ರಾಮನಗರ, ಜುಲೈ 14: ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಘಾತಗಳಿಂದ ಅಪಖ್ಯಾತಿಗೆ ತುತ್ತಾಗಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಅಪಘಾತಗಳ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು ಪ್ರಾಣಹಾನಿ ತಪ್ಪಿಸುವಂತೆ ಸಂಸದ ಡಿ.ಕೆ ಸುರೇಶ್ ಜಿಲ್ಲಾಡಳಿತಕ್ಕೆ ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರು-ಮೈಸೂರು ಪ್ರಯಾಣಿಕರ ಸುಗಮ ಸಂಚಾರಕ್ಕೆ ನಿರ್ಮಾಣ ಮಾಡಿದ ಹೆದ್ದಾರಿ ಹೆಚ್ಚು ಅಪಘಾತಗಳಿಂದ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಪಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ಎಡಿಜಿಪಿ ಸೇರಿದಂತೆ ಹಲವು ಅಧಿಕಾರಿಗಳು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತ ಸ್ಥಳಗಳನ್ನು ಗುರುತಿಸಿದ್ದು, ಸದರಿ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯಾಗಿ ರೋಡ್ ಸೈನ್ಗಳು, ಸ್ಪೀಡ್ ಕ್ಯಾಮೆರಾಗಳನ್ನು ಅಳವಡಿಸಿ ಹೆಚ್ಚು ವೇಗವಾಗಿ ಚಲಿಸುವ ವಾಹನಗಳಿಗೆ ದಂಡ ವಿಧಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಡಿ.ಕೆ.ಸುರೇಶ್ ಸೂಚನೆ ನೀಡಿದರು.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಯಲು ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಇಂಜನಿಯರ್ಗಳು ಸೇರಿದಂತೆ ಅಧಿಕಾರಿಗಳ ತಂಡ ಜಂಟಿ ಸಮೀಕ್ಷೆ ನಡೆಸಿ ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ನಿಖರ ಕಾರಣ ಬಗ್ಗೆ ಅಧ್ಯಯನ ಮಾಡಿ, ಪ್ರಯಾಣಿಕರು ಭಯ ಮುಕ್ತವಾಗಿ ಸುಗಮ ಸಂಚಾರ ಮಾಡಲು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಲ್ಡನ್ ಅವರ್ನಲ್ಲಿ ಚಿಕಿತ್ಸೆ ಸಿಗುವ ಅನುಕೂಲ ಆಗಬೇಕು
ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಸೇರಿಂದತೆ ಜಿಲ್ಲೆಯಲ್ಲಿ ವಿವಿಧೆಡೆ ಸಂಭವಿಸುವ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗಾಯಗೊಳ್ಳುತ್ತಿರುವ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಟ್ರೋಮ್ ಸೆಂಟರ್ ಸ್ಥಾಪಿಸಿ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆ ಒಂದು ಗಂಟೆ ‘ಗೋಲ್ಡನ್ ಅವರ್’ ಆಗಿದ್ದು ಆ ಸಂದರ್ಭದಲ್ಲಿ ಅಪಘಾತ ಸಂಭವಿಸಿದವರಿಗೆ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಪ್ರಾಣ ಉಳಿಯುವ ಸಂಭವ ಹೆಚ್ಚು ಇರುತ್ತದೆ. ಹೀಗಾಗಿ ಟ್ರೋಮ್ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಹಾಳಾಗಿರುವ ಕೆರೆಗಳನ್ನು ದುರಸ್ತಿ ಮಾಡಿ
ಇನ್ನು ದಶಪಥ ಹೆದ್ದಾರಿ ನಿರ್ಮಾಣದ ಸಮಯದಲ್ಲಿ ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತಿದ್ದ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಹೆದ್ದಾರಿ ಸಮೀಪದ ಕೆರೆಗಳು ಹಾಳಾಗಿವೆ. ಹೆದ್ದಾರಿ ನಿರ್ಮಾಣದ ವೇಳೆ ಹಾಳಾಗಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ದುರಸ್ಥಿ ಮಾಡಿ. ದಶಪಥ ಹೆದ್ದಾರಿಗಳ ಪ್ರವೇಶ ಮತ್ತು ಹೊರ ಹೋಗುವ ಮಾರ್ಗಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಹಾಗೆ ಅವಶ್ಯವಿರುವ ಕಡೆ ಪ್ರವೇಶ ಮತ್ತು ಹೊರ ಹೋಗುವ ಮಾರ್ಗಗಳನ್ನು ನಿರ್ಮಿಸಲು ಕ್ರಮವಹಿಸಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಭಾರಿ ವಾಹನಗಳು ಬಲಭಾಗದಲ್ಲಿ ಸಂಚರಿಸುತ್ತಿದ್ದು ಅವುಗಳು ಎಡಭಾಗದ ಮೊದಲ ಮತ್ತು ಎರಡನೇ ಲೈನ್ನಲ್ಲಿ ಸಂಚರಿಸಲು ಕ್ರಮವಹಿಸಿ ಎಂದರು.
ರಾಮನಗರದ ವಡೇರಹಳ್ಳಿ, ಬೂದಯ್ಯನದೊಡ್ಡಿ, ಅಚಲು, ಪಾದರಹಳ್ಳಿ, ಬಿದರಹಳ್ಳಿ ಕಟ್ಟೆ, ಗೊಲ್ಲರದೊಡ್ಡಿ ಸೇರಿದಂತೆ ಪ್ರಮುಖ 25ಕ್ಕೂ ಹೆಚ್ಚು ಅಪಘಾತ ಸಂಭವಿಸುತ್ತಿರುವ ಸ್ಥಳಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತ ಸಂಭವಿಸದಂತೆ ಅಗತ್ಯ ಕ್ರಮವಹಿಸಿ. ರಾಮನಗರ ಜಿಲ್ಲೆಯ ಬಿಡದಿ, ಹಾರೋಹಳ್ಳಿ, ರಾಮನಗರ, ಕನಕಪುರ ಹಾಗೂ ಚನ್ನಪಟ್ಟಣಗಳ ಮುಖ್ಯರಸ್ತೆಯಲ್ಲಿ ಜಂಕ್ಷನ್ಗಳು ಇದ್ದರು ಸಹ ಇವು ಸಮರ್ಪಕವಾಗಿರುವುದಿಲ್ಲ. ಆದ್ದರಿಂದ ಸದರಿ ಜಂಕ್ಷನ್ಗಳನ್ನು ದುರಸ್ತಿಗೊಳಿಸಲು ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
English summary
MP D.K Suresh instructs Ramanagara officials to prevent accidents on Bengaluru-Mysuru Expressway. Know more
Story first published: Friday, July 14, 2023, 15:58 [IST]