Bengaluru
oi-Naveen Kumar N

ಬೆಂಗಳೂರು, ಜುಲೈ 7: ಮೋದಿ ಹೆಸರು ಕುರಿತಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿನ ಶಿಕ್ಷೆಗೆ ತಡೆ ನೀಡಬೇಕೆಂದು ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದ ಸಂಬಂಧ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕಪ್ಪು ದಿನ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಜನ ಇದನ್ನೆಲ್ಲಾ ನೋಡುತ್ತಿದ್ದಾರೆ. ನಾವೆಲ್ಲರೂ ರಾಹುಲ್ ಗಾಂಧಿ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ನ್ಯಾಯಕ್ಕೆ ಗೆಲುವು ಸಿಗದೇ ಇರುವುದು ದುರದೃಷ್ಟಕರ, ಇಂದು ಪ್ರಜಾಪ್ರಭುತ್ವದ ಕೊಲೆಯಾಗಿದೆ. ಏನೇ ಆದರೂ, ದೇಶದ ಜನ ಮತ್ತು ವಿರೋಧ ಪಕ್ಷಗಳು ಒಗ್ಗಟ್ಟಾಗಿ ರಾಹುಲ್ ಗಾಂಧಿ ಬೆಂಬಲಕ್ಕೆ ನಿಲ್ಲಲಿವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿ ಹೋರಾಟವನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ
ಬಿಜೆಪಿಯನ್ನು ಸೋಲಿಸಲು ದೇಶಾದ್ಯಂತ ಸಂಚರಿಸಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತಿರುವ ರಾಹುಲ್ ಗಾಂಧಿ ಬಿಜೆಪಿ ನಾಯಕರ ನಿದ್ದೆಗೆಡಿಸಿದ್ದಾರೆ. ಬಿಜೆಪಿಯವರಿಗೆ ರಾಹುಲ್ ಗಾಂಧಿ ಜನಪ್ರಿಯತೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅವರನ್ನು ನಿರ್ಬಂಧಿಸಲು ಈ ರೀತಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಅವರಿಗೆ ಮತ್ತಷ್ಟು ಬಲ ಸಿಗಲಿದೆ. ಹೋರಾಟ ಮುಂದುವರೆಯಲಿದೆ ಎಂದು ಡಿಕೆಶಿ ಹೇಳಿದರು.
ಇಂದು ಮಧ್ಯಾಹ್ನ 3.30ಕ್ಕೆ ಕಾಂಗ್ರೆಸ್ನ ಎಲ್ಲಾ ಶಾಸಕರು ವಿಧಾನಸೌಧದ ಮುಂದೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದರು.
ಮೋದಿ ಉಪನಾಮ ಹೊಂದಿರುವವರು ಕಳ್ಳರು ಎಂದು ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದೆ.
English summary
DK Shivakumar Expresses Outrage Over “Gujarat High Court’s Rejection of Rahul Gandhi’s Plea, Announces Protest at 3:30 pm in front of Mahatma Gandhi Statue as it is the Dark day for Democracy”.