Last Updated:
ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ (Actor Chetan Ahimsa) ತಮ್ಮದೇ ಆದ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ (Actor Chetan Ahimsa) ತಮ್ಮದೇ ಆದ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಹಲವು ವರ್ಷಗಳಿಂದ ಪ್ರತಿಭಟನೆ, ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ಚೇತನ್ ಅಹಿಂಸಾ ಇದೀಗ ನೇರ ರಾಜಕೀಯ ಪ್ರವೇಶದ ಮೂಲಕ ತಮ್ಮ ವಿಚಾರಧಾರೆಯನ್ನು ಜನರ ಮುಂದೆ ತರುವ ನಿರ್ಧಾರ ಮಾಡಿದ್ದಾರೆ.
ಹೊಸ ಪಕ್ಷದ ಕುರಿತು ಮಾತನಾಡಿದ ಚೇತನ್ ಅಹಿಂಸಾ, ಸಮಾಜದ ವಿವಿಧ ವರ್ಗಗಳ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳನ್ನು ಒಗ್ಗೂಡಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದ್ದಾರೆ. ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು, ಸಾಮಾಜಿಕ ಹೋರಾಟಗಾರರ ವೇದಿಕೆಗಳು ಮತ್ತು ಸಮಾನತೆಗಾಗಿ ಕಾರ್ಯನಿರ್ವಹಿಸುತ್ತಿರುವ ಹಲವು ಸಂಘಟನೆಗಳನ್ನು ಒಂದೇ ರಾಜಕೀಯ ವೇದಿಕೆಯಡಿ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಹೊಸ ಪಕ್ಷದ ನಿರ್ಮಾಣಕ್ಕಾಗಿ ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸಿರುವುದಾಗಿ ಚೇತನ್ ಅಹಿಂಸಾ ತಿಳಿಸಿದ್ದಾರೆ. ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ 2027ರ ಜನವರಿ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷದ ಅಧಿಕೃತ ಘೋಷಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಹೆಸರು, ಪಕ್ಷದ ಚಿಹ್ನೆ, ಧ್ವಜ, ಪ್ರಣಾಳಿಕೆ ಹಾಗೂ ರಾಜ್ಯ ಸಮಿತಿಯ ಸದಸ್ಯರ ವಿವರಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಅದರ ಜೊತೆಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆ ತರುವುದು ಪಕ್ಷದ ಪ್ರಮುಖ ಗುರಿಗಳಲ್ಲಿ ಒಂದಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಎಲ್ಲರಿಗೂ ಕೈಗೆಟುಕುವ ಆರೋಗ್ಯ ಸೇವೆ ದೊರಕುವಂತೆ ನೀತಿಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಜೊತೆಗೆ ಪೊಲೀಸ್ ವ್ಯವಸ್ಥೆ ಮತ್ತು ಜೈಲು ಆಡಳಿತದಲ್ಲಿ ಹಲವು ಸುಧಾರಣೆಗಳ ಅಗತ್ಯವಿದೆ. ಈ ಕ್ಷೇತ್ರಗಳಲ್ಲಿ ಮಾನವ ಹಕ್ಕುಗಳಿಗೆ ಹೆಚ್ಚಿನ ಮಹತ್ವ ನೀಡುವ ಬದಲಾವಣೆಗಳನ್ನು ತರಲು ಪಕ್ಷ ಕೆಲಸ ಮಾಡಲಿದೆ ಎಂದು ಚೇತನ್ ಅಹಿಂಸಾ ತಿಳಿಸಿದ್ದಾರೆ.
ಒಟ್ಟಿನಲ್ಲಿ ನಟ ಚೇತನ್ ಅಹಿಂಸಾ ಅವರ ಹೊಸ ರಾಜಕೀಯ ಪಕ್ಷದ ಘೋಷಣೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಹಾಗೆಯೇ ಈ ರಾಜಕೀಯ ಪಕ್ಷ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಪಡೆಯುತ್ತದೆ ಎಂಬುದನ್ನು ಕಾದುನೋಡಬೇಕಿದೆ.
Bangalore [Bangalore],Bangalore,Karnataka
Jun 21, 2026 10:12 PM IST













