Last Updated:
ಬೈಎಲೆಕ್ಷನ್ಗೂ ಮುನ್ನವೇ ಕೈ ಪಡೆಗೆ ಬಿಗ್ ಶಾಕ್ ಎದುರಾಗಿದೆ. ಪ್ರಚಾರ ನಡೆಸುತ್ತಿರುವಾಗಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಶ್ಚಿಮ ಬಂಗಾಳದ (West Bengal) ರಾಜಕೀಯದಲ್ಲಿ ನಂದಿಗ್ರಾಮ (Nandigram) ಮತ್ತೊಮ್ಮೆ ಕೇಂದ್ರಬಿಂದುವಾಗಿದೆ. ಉಪಚುನಾವಣೆಗೂ (By-election) ಮುನ್ನ ತೀವ್ರ ರಾಜಕೀಯ ತಿಕ್ಕಾಟಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ, ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ನಂದಿಗ್ರಾಮದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ನಂದಿಗ್ರಾಮದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಬಂಧಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ನಂದಿಗ್ರಾಮದ ಕಾಂಗ್ರೆಸ್ ಅಭ್ಯರ್ಥಿ ಹಳೆಯ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದರು. ಅವರ ಹೆಸರಿನಲ್ಲಿ ವಾರಂಟ್ ಕೂಡ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಿಲನ್ ಪ್ರಧಾನ್ ಅವರನ್ನು ಬಂಧಿಸಲಾಗಿದೆ. ಶನಿವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಚುನಾವಣೆಗೂ ಮುನ್ನ ವಿರೋಧ ಪಕ್ಷವನ್ನು ಸಂಪೂರ್ಣವಾಗಿ ಹತ್ತಿಕ್ಕಲು ಬಿಜೆಪಿ ಬಯಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಮಾತನಾಡಿ, ತಮ್ಮ ಪಕ್ಷದ ಅಭ್ಯರ್ಥಿಯ ಬಂಧನದ ಹಿಂದೆ ಬಿಜೆಪಿಯ ರಾಜಕೀಯ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ. ಆದರೆ, ಬಿಜೆಪಿಯು ಈ ಆರೋಪಗಳನ್ನು ತಳ್ಳಿಹಾಕಿದ್ದು, ಪೊಲೀಸರು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಮತ್ತು ಇದರೊಂದಿಗೆ ರಾಜಕಾರಣಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ಮಿಲನ್ ಪ್ರಧಾನ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಮಾಜಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ, “ಚುನಾವಣೆಗಳನ್ನು ಒಂದು ತಮಾಷೆಯನ್ನಾಗಿ ಮಾಡಲಾಗುತ್ತಿದೆ. ಈ ಬಂಧನವು ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿಯಲ್ಲಿರುವ ಭಯವನ್ನು ತೋರಿಸುತ್ತದೆ. ಅವರನ್ನು ಬಂಧಿಸುವ ಮೂಲಕ ತಾವು ನೈತಿಕವಾಗಿ ಸೋತಿರುವುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮದಿಂದ ಜಯಗಳಿಸಿದ್ದರು, ಆದರೆ ಅವರು ಆ ಸ್ಥಾನವನ್ನು ತೆರವುಗೊಳಿಸಿದ್ದರು. ನಂದಿಗ್ರಾಮದಲ್ಲಿ ಅಕ್ಟೋಬರ್ 6 ರಂದು ಉಪಚುನಾವಣೆ ನಡೆಯಲಿದೆ. ಸುವೇಂದು ಅವರ ಸಹಾಯಕ ಚಂದ್ರನಾಥ್ ರಥ್ ಅವರ ತಾಯಿ ಹಸಿರಾಣಿ ರಥ್ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಈಸ್ಟ್ ಮೇದಿನಿಪುರದ ಚಾಂದಿಪುರದ ನಿವಾಸಿಯಾಗಿರುವ ಹಸಿರಾಣಿ ಅವರನ್ನು ದಾಖಲೆ ಮತಗಳಿಂದ ಗೆಲ್ಲಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
ಸಿಪಿಐ (CPI) ಮತ್ತು ಐಎಸ್ಎಫ್ (ISF) ಕೂಡ ನಂದಿಗ್ರಾಮದಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ, ಆದರೆ ಶುಕ್ರವಾರ ಮಮತಾ ಬ್ಯಾನರ್ಜಿ ಅವರ ಅಭ್ಯರ್ಥಿ ಸಂಚಿತಾ ಅವರು ತಾವಿನ್ನು ಸ್ಪರ್ಧಿಸುವುದಿಲ್ಲ ಎಂದು ಹಠಾತ್ ಘೋಷಣೆ ಮಾಡಿದರು. ಇದರ ಬಳಿಕ ಬಿಜೆಪಿ ಮತ್ತು ಮುಖ್ಯಮಂತ್ರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮಮತಾ, ನಂದಿಗ್ರಾಮದಲ್ಲಿ ತಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ.














