Last Updated:
ದೂಷ್ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿರುವುದು ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಜೈಲು ಸೇರಿರುವ ನಟ ದರ್ಶನ್ಗೆ (Darshan) ಮತ್ತೊಂದು ಹಿನ್ನಡೆಯಾಗಿದೆ. ಪ್ರದೋಷ್ ನ ಮಾಫಿ ಸಾಕ್ಷಿಯನ್ನಾಗಿ ಮಾಡುವ ವಿಚಾರದಲ್ಲಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ನ್ಯಾಯಾಲಯ ಮತ್ತೊಮ್ಮೆ ಒಪ್ಪಿಗೆ ಸೂಚಿಸಿದೆ. ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ವಿಚಾರಣೆಯಲ್ಲಿ ಪ್ರದೋಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿಂದೆ ಕೂಡ ಸೆಷನ್ಸ್ ಕೋರ್ಟ್ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿತ್ತು. ಆದರೆ, ಈ ಆದೇಶದ ವಿರುದ್ಧ ದರ್ಶನ್ ಪರ ಕಾನೂನು ತಂಡ ಹೈಕೋರ್ಟ್ ಮೊರೆ ಹೋಗಿತ್ತು.
ಹೈಕೋರ್ಟ್ ಹಿಂದಿನ ಆದೇಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವಂತೆ ಸೂಚಿಸಿ, ಪ್ರಕರಣದ ವಿಚಾರದಲ್ಲಿ ಹೊಸ ಆದೇಶ ನೀಡುವಂತೆ ಸೆಷನ್ಸ್ ಕೋರ್ಟ್ಗೆ ನಿರ್ದೇಶನ ನೀಡಿತ್ತು. ಇದೀಗ ಹೈಕೋರ್ಟ್ ಸೂಚನೆಯಂತೆ ಸೆಷನ್ಸ್ ಕೋರ್ಟ್ ಮತ್ತೊಮ್ಮೆ ಅರ್ಜಿಯನ್ನು ಪರಿಗಣಿಸಿ ಆದೇಶ ಹೊರಡಿಸಿದೆ.
ಪ್ರದೋಷ್ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿ ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಪ್ರದೋಷ್ ವಿರುದ್ಧದ ದೂರಿನ ತನಿಖೆ ಪೂರ್ಣಗೊಳ್ಳುವವರೆಗೆ ಮಾಫಿ ಸಾಕ್ಷಿ ವಿಚಾರಕ್ಕೆ ಸಂಬಂಧಿಸಿದ ಆದೇಶವನ್ನು ಮುಂದೂಡಬೇಕು ಎಂಬುದು ದರ್ಶನ್ ಪರ ವಕೀಲರ ವಾದವಾಗಿತ್ತು.
ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಯನ್ನು ಮುಂದೂಡುವಂತೆ ಸಲ್ಲಿಸಿದ್ದ ದರ್ಶನ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ನ್ಯಾಯಾಲಯ ಅನುಮೋದನೆ ನೀಡಿದೆ.
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ಕೋರ್ಟ್ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಶೀಘ್ರದಲ್ಲೇ ಮುಂದಿನ ವಿಚಾರಣೆಯ ದಿನಾಂಕವನ್ನು ನ್ಯಾಯಾಲಯ ನಿಗದಿ ಮಾಡುವ ಸಾಧ್ಯತೆಯಿದೆ.
(ವರದಿ: ಮಂಜುನಾಥ್, ಪ್ರತಿನಿಧಿ, ನ್ಯೂಸ್18 ಕನ್ನಡ, ಬೆಂಗಳೂರು)














