Karnataka
oi-Naveen Kumar N
ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಹಾಕುವ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕದ ಬಗ್ಗೆ ಇಂದು ನಿರ್ಧಾರವಾಗಲಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಗೊಂದಲವಿರಬಾರದು ಎನ್ನುವ ಕಾರಣಕ್ಕೆ ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಅರ್ಜಿ ಸ್ವೀಕೃತಿ ತಡವಾಗುತ್ತಿದೆ.
ಇಂದು (ಜೂನ್ 28) ನಡೆಯುವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೂ ಅರ್ಜಿ ನೋಂದಣಿ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು ಸುಮಾರು 70 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.
ಇನ್ನು ಗೃಹಲಕ್ಷ್ಮಿ, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಇಂದು ನಿರ್ಧರಿಸುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದರೆ ಜುಲೈ ಮೊದಲ ವಾರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಗೃಹಲಕ್ಷ್ಮಿ ಯೋಜನೆಗೆ ವಿಶೇಷ ಆ್ಯಪ್ ರೆಡಿ
ಇನ್ನು ಗೃಹಜ್ಯೋತಿ ಅರ್ಜಿ ಸಲ್ಲಿಕೆ ವೇಳೆ ಸರ್ವರ್ ಸಮಸ್ಯೆ, ಹಲವು ಗೊಂದಗಳು ಉಂಟಾದ ಕಾರಣ ಸಮಸ್ಯೆಯಾಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ವೇಳೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಪ್ರತ್ಯೇಕವಾದ ಮೊಬೈಲ್ ಆ್ಯಪ್ ರೆಡಿ ಮಾಡಲಾಗಿದೆ.
ಯೋಜನೆಯನ್ನು ಸರಿಯಾದ ಫಲಾನುಭವಿಗಳಿಗೆ ತಲುಪಿಸಲು, ಯೋಜನೆ ದುರ್ಬಳಕೆ ತಪ್ಪಿಸಲು ಸಾಕಷ್ಟು ಮುಂಜಾಗ್ರತೆ ವಹಿಸಲಾಗುತ್ತಿದೆ. ಇದಕ್ಕಾಗಿಯೇ ಅಧಿಕಾರಿಗಳು ಸಮಸಯ ತೆಗೆದುಕೊಂಡು ಆಪ್ ಸಿದ್ದ ಮಾಡಿದ್ದಾರೆ. ಇಂದಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ನ ಪ್ರಾತ್ಯಕ್ಷಿಕೆಯನ್ನು ನೋಡಲಿದ್ದು, ಒಪ್ಪಿಗೆ ಕೊಟ್ಟರೆ ಅತಿ ಶೀಘ್ರದಲ್ಲೇ ಅರ್ಜಿ ಸ್ವೀಕಾರ ಕೆಲಸ ಆರಂಭವಾಗಲಿದೆ.
ಗೃಹ ಜ್ಯೋತಿ: ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಬಳಕೆದಾರರಿಗೆ ಮಹತ್ವದ ಸೂಚನೆ
ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್ನಲ್ಲಿ ಆ್ಯಪ್ ಲಭ್ಯವಾಗಲಿದೆ. ಮೊಬೈಲ್ ಆ್ಯಪ್ ಮಾತ್ರವಲ್ಲದೆ, ಸೇವಾಸಿಂಧು ವೆಬ್ಸೈಟ್ನಲ್ಲಿ ಕೂಡ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಈಗಾಗಲೇ ಸರ್ಕಾರ ಹೇಳಿದೆ.
ಯಾರಿಗೆ ಸಿಗಲಿದೆ 2000 ರೂಪಾಯಿ
ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಈ ಯೋಜನೆಯ ಲಾಭ ಪಡೆಯಬಹುದು. ಮನೆಯಲ್ಲಿ ಒಬ್ಬರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯಡಿ ಹಣ ಸಿಗಲಿದೆ. ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿರುವ ಮೊಬೈಲ್ ನಂಬರ್, ಆಧಾರ್ ನಂಬರ್, ಕಡ್ಡಾಯವಾಗಿ ಬೇಕಾಗುತ್ತದೆ. ನೆಯೊಡತಿಯ ಗಂಡ ಆದಾಯ ತೆರಿಗೆ ಪಾವತಿದಾರನಾಗಿದ್ದರೆ ಅಂತಹವರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ.
ಏನೆಲ್ಲಾ ದಾಖಲೆ ಬೇಕು?
ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು ಎನ್ನುವ ಬಗ್ಗೆ ಇಂದು ಸ್ಪಷ್ಟ ಮಾಹಿತಿ ಸಿಗಲಿದೆ. ಮೂಲಗಳ ಪ್ರಕಾರ, ಮನೆ ಯಜಮಾನಿಯ ಬ್ಯಾಂಕ್ ಖಾತೆ ವಿವರ, ಆಧಾರ್ ನಂಬರ್, ಪಾನ್ ಕಾರ್ಡ್ ಸಂಖ್ಯೆ, ಮೊಬೈಲ್ ನಂಬರ್ ಕಡ್ಡಾಯವಾಗಿ ಕೇಳುವ ಸಾಧ್ಯತೆ ಹೆಚ್ಚಾಗಿದೆ.
English summary
The government will decide on the Gruha Lakshmi Scheme’s application receiving date during today’s Cabinet meeting, chaired by CM Siddaramaiah. The government has also designed a new application for applying to the Gruha Lakshmi Scheme.