Chitradurga
lekhaka-Chidananda M
ಚಿತ್ರದುರ್ಗ, ಜುಲೈ, 09: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿ ಶ್ರೀ ಕಾಮಕುಮಾರನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಹೊಸದುರ್ಗ ಕುಂಚಿಟಿಗ ಮಠದ ಡಾ.ಶ್ರೀ ಶಾಂತವೀರ ಶ್ರೀಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಶ್ರೀಗಳು ಈ ಹೇಯ ಕೃತ್ಯವನ್ನು ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜದ ಅಭಿವೃದ್ಧಿಗಾಗಿ ತಮ್ಮ ಬದುಕನ್ನು ಸಮರ್ಪಿಸಿ, ಸಮಾಜಕ್ಕಾಗಿಯೇ ಬದುಕಿರುವ ಸಾಧು ಸಂತರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಹೇಯ ಕೃತ್ಯಗಳಾಗಿವೆ. ಅಹಿಂಸಾ ತತ್ವವನ್ನು ಪ್ರಧಾನವಾಗಿಸಿಕೊಂಡು ಧರ್ಮಬೋಧನೆಯಲ್ಲಿ ತೊಡಗಿದ್ದ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಘೋರವಾದ ಅಪರಾಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಈ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಹಾಗೆಯೇ ಸಹಾಯ ಬೇಕು ಎಂದು ಬಂದವರಿಗೆ ಹಣ ಕೊಟ್ಟು ಹೆಣ ಪಡೆಪಡೆದಂತೆ ಅಯಿತು. ಆದ್ದರಿಂದ ಸಮಾಜ ಹಾಗೂ ಧರ್ಮದ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧು ಸಂತರಿಗೆ ಸರ್ಕಾರ ವಿಶೇಷ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ಜೈನಮುನಿ ಹತ್ಯೆ ಕೇಸ್ಗೆ ದೊಡ್ಡ ಟ್ವಿಸ್ಟ್: ಆಪ್ತನಿಂದಲೇ ಭೀಕರ ಕೊಲೆ?
ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ
ಮತ್ತೊಂದೆಡೆ ಕರ್ನಾಟಕದಲ್ಲಿರುವ ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರಿಸಬೇಕು. ಹಾಗೂ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ಎಂದು ಗದುಗಿನ ತೋಂಟದಾರ್ಯ ಡಾ. ಸಿದ್ಧರಾಮ ಸ್ವಾಮಿಜಿ ಧಾರವಾಡದಲ್ಲಿ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೂರಕ್ಕೂ ಅಧಿಕ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರವಾಡ ಕಲ್ಯಾಣ ಸಭೆ ಸೇರಿ ಚಿಂತನ ಮಂಥನ ನಡೆಸಿ ಒಮ್ಮತದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ನಿರಂತರವಾಗಿ ಮುಂದುವರಸುತ್ತೇವೆ ಎಂದು ತಿಳಿಸಿದರು.
ಲಿಂಗಾಯತ ಧರ್ಮದ ಒಳ ಪಂಗಡಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿವೆ. ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು 2008ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲಿಂಗಾಯತ ಹೋರಾಟಕ್ಕೆ ಮಣಿದು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ ನೇತೃತ್ವದ ಸಮಿತಿಯನ್ನು ನೇಮಿಸಿತ್ತು. ಆ ಸಮಿತಿಯು ಸಮಗ್ರ ಅಧ್ಯಯನ ನಡೆಸಿ ವಿಸ್ತೃತವಾದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತು. ಸರ್ಕಾರ ಅದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಅಭಿಪ್ರಾಯ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಆದರೆ ದುರ್ದೈವದಿಂದ ಕೇಂದ್ರ ಸರ್ಕಾರ ಆ ಕುರಿತು ಯಾವುದೇ ಸಮಾಲೋಚನೆ ನಡೆಸದೇ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದೆ. ಈ ಹಿನ್ನೆಲೆಯಲ್ಲಿ ಈಗ ಸಭೆ ಸೇರಿದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಮಹಾಸ್ವಾಮಿಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಿದ್ಧಪಡಿಸಿದ ಪ್ರಸ್ತಾವನೆಯನ್ನು ಸೂಕ್ತ ಆಧಾರಗಳು ಹಾಗೂ ತಿದ್ದುಪಡಿಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಈ ಚಿಂತನ ಮಂಥನ ಸಭೆಯ ಮೂಲಕ ಆಗ್ರಹಿಸುತ್ತೇವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿ ಮಠದ ಬಸವಲಿಂಗ ಪಟ್ಟದದೇವರು, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೂಡಲಸಂಗಮ ಧರ್ಮ ಪೀಠದ ಡಾ. ಗಂಗಾಮಾತಾಜಿ, ಮೂರು ಸಾವಿರ ಮಠದ ಗುರುಸಿದ್ದರಾಜ ಯೋಗೇಂದ್ರ ಸ್ವಾಮೀಜಿ, ಇಳಕಲ್ನ ಗುರುಮಹಾಂತ ಸ್ವಾಮೀಜಿ, ಮೈಸೂರಿನ ಚಿದಾನಂದ ಸ್ವಾಮೀಜಿ, ಅಥಣಿ ಪ್ರಭು ಚನ್ನಬಸವ ಸ್ವಾಮೀಜಿ ಸೇರಿದಂತೆ ಹಲವರು ಭಾಗವಹಿಸಿದ್ದರು.
English summary
Shri Shanthaveera seer reaction on Jain Seer kamakumaranandi maharaj Murder case
Story first published: Sunday, July 9, 2023, 17:39 [IST]