Last Updated:
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಪೀಠವು ರಾಜ್ಪಾಲ್ ಯಾದವ್ ವಿರುದ್ಧ ದಾಖಲಾಗಿದ್ದ ಹಲವು ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿದೆ.
ಬಾಲಿವುಡ್ನ ಜನಪ್ರಿಯ ಹಾಸ್ಯ ನಟ ರಾಜ್ಪಾಲ್ ಯಾದವ್ (Rajpal Yadav) ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ವರ್ಷಗಳಿಂದ ನಡೆಯುತ್ತಿದ್ದ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಅವರಿಗೆ ವಿಧಿಸಲಾಗಿದ್ದ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ ಅವರ ಪತ್ನಿ ರಾಧಾ ಯಾದವ್ ಅವರಿಗೂ ಭಾರಿ ಮೊತ್ತದ ಪರಿಹಾರ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ಈ ಪ್ರಕರಣ ಬಾಲಿವುಡ್ ವಲಯದಲ್ಲಿ ಮತ್ತೆ ಸುದ್ದಿಯಾಗಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಪೀಠವು ರಾಜ್ಪಾಲ್ ಯಾದವ್ ವಿರುದ್ಧ ದಾಖಲಾಗಿದ್ದ ಹಲವು ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿದೆ.
ಒಟ್ಟು ಏಳು ಪ್ರಕರಣಗಳಲ್ಲಿ ತಲಾ ಮೂರು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಎತ್ತಿಹಿಡಿದಿರುವ ನ್ಯಾಯಾಲಯ, ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ ಎಂದು ಸ್ಪಷ್ಟಪಡಿಸಿದೆ. ಜೊತೆಗೆ ಪ್ರತಿಯೊಂದು ಪ್ರಕರಣದಲ್ಲೂ ದೂರುದಾರರಿಗೆ ತಲಾ 1.05 ಕೋಟಿ ರೂಪಾಯಿ ಪಾವತಿಸುವಂತೆ ಆದೇಶಿಸಿದೆ.
ಪ್ರತಿ ಪ್ರಕರಣದಲ್ಲೂ ತಲಾ 5 ಕೋಟಿ 51 ಲಕ್ಷ 380 ರೂಪಾಯಿಗಳನ್ನು ದೂರುದಾರರಿಗೆ ಪಾವತಿಸುವಂತೆ ಕೋರ್ಟ್ ಆದೇಶ ನೀಡಿದೆ. ಈ ಹಿಂದೆ ರಾಜ್ಪಾಲ್ ಯಾದವ್ ಪಾವತಿಸಿದ್ದ 2.25 ಕೋಟಿ ರೂಪಾಯಿಯನ್ನು ಅಂತಿಮ ಮೊತ್ತದಲ್ಲಿ ಹೊಂದಾಣಿಕೆ ಮಾಡಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ವಿಚಾರಣೆಯ ಅಂತಿಮ ಹಂತದಲ್ಲಿ ದೂರುದಾರ ಸಂಸ್ಥೆಯಾದ ‘ಮೆಸರ್ಸ್ ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್’ಗೆ ಇನ್ನು ಮುಂದೆ ಯಾವುದೇ ಹಣ ಪಾವತಿಸಲು ಸಾಧ್ಯವಿಲ್ಲ ಎಂದು ರಾಜ್ಪಾಲ್ ಯಾದವ್ ತಿಳಿಸಿದ್ದರು ಎನ್ನಲಾಗಿದೆ.
ಹಣ ಪಾವತಿಸುವ ಬದಲು ತಾವು ಜೈಲಿಗೆ ಹೋಗಲು ಸಿದ್ಧ ಎಂದು ಅವರು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದ ವಿಚಾರವೂ ಈ ಪ್ರಕರಣದಲ್ಲಿ ಗಮನ ಸೆಳೆದಿತ್ತು.
ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಪಾಲ್ ಯಾದವ್ ಅವರಿಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಜೈಲು ಶಿಕ್ಷೆಯ ಜಾರಿಗೆ ತಾತ್ಕಾಲಿಕ ತಡೆ ನೀಡಲಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಅವರು ಪರಿಹಾರ ಪಡೆಯಲಿದ್ದಾರೆಯೇ ಅಥವಾ ಶಿಕ್ಷೆ ಜಾರಿಯಾಗಲಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ. ಯಾವುದೇ ವ್ಯಕ್ತಿ ಸಿನಿಮಾ ಕ್ಷೇತ್ರಕ್ಕೆ ಸೇರಿದವರಾಗಿದ್ದರೂ ಅಥವಾ ಜನಪ್ರಿಯ ವ್ಯಕ್ತಿಯಾಗಿದ್ದರೂ, ಅವರಿಗೆ ಪ್ರತ್ಯೇಕ ನಿಯಮಗಳು ಅಥವಾ ವಿಶೇಷ ರಿಯಾಯಿತಿಗಳನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವನ್ನು ಪುನರುಚ್ಚರಿಸಿದ ನ್ಯಾಯಾಲಯದ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ.
Bangalore [Bangalore],Bangalore,Karnataka














