Last Updated:
Supreme Court: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ (Paper Leak Case) ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಇಂತಹ ಘಟನೆಗಳು ವಿದ್ಯಾರ್ಥಿಗಳು (Students) ಮತ್ತು ಅವರ ಕುಟುಂಬಗಳಿಗೆ ಅತ್ಯಂತ ಮಾನಸಿಕ ಆಘಾತ ಉಂಟುಮಾಡುತ್ತವೆ. ಯುವಕರನ್ನು ನಾವು ನಿರಾಶೆಗೊಳಿಸಬಾರದು” ಎಂದು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠ ಹೇಳಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠವು ಎನ್ಟಿಎಗೆ ತೀಕ್ಷ್ಣ ಪ್ರಶ್ನೆಗಳನ್ನು ಕೇಳಿತು. ದೇಶದ ಅತ್ಯಂತ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್ಸಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವಿಲ್ಲದೆ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿದೆ. ಅದರಿಂದ ಪಾಠ ಕಲಿಯಬೇಕು ಎಂದು ಕೋರ್ಟ್ ಸೂಚಿಸಿತು. “UPSCಯಲ್ಲಿ ಇಂತಹ ಪರಿಸ್ಥಿತಿ ಎಂದಿಗೂ ಎದುರಾಗಿಲ್ಲ. ನೀವು ಅವರಿಂದ ಕಲಿಯಬೇಕು” ಎಂದು ನ್ಯಾಯಮೂರ್ತಿ ನರಸಿಂಹ ಹೇಳಿದ್ದಾರೆ ಎಂದು ವರದಿಯಾಗಿದೆ.
ನೀಟ್ ಯುಜಿ 2026 ಪರೀಕ್ಷೆ ಮೇ 3ರಂದು ನಡೆದಿತ್ತು. ಆದರೆ ಹಲವು ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದ ನಂತರ ಮೇ 12ರಂದು NTA ಪರೀಕ್ಷೆಯನ್ನು ರದ್ದುಪಡಿಸಿತು. ಇದೀಗ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಂದೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, NTAಯನ್ನು ಪುನರ್ರಚನೆ ಮಾಡಬೇಕು ಅಥವಾ ಅದರ ಬದಲು ಸ್ವಾಯತ್ತ ಮತ್ತು ತಾಂತ್ರಿಕವಾಗಿ ಬಲಿಷ್ಠ ಸಂಸ್ಥೆಯನ್ನು ಸ್ಥಾಪಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ.
ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸರ್ಕಾರದ ಪರವಾಗಿ ಹಾಜರಾಗಿ, ಯುವಕರ ಆತಂಕವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ಈ ವಿಷಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುಂದಿನ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಕೋರ್ಟ್ಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, “ನಿಜವಾದ ಜವಾಬ್ದಾರಿ ನಿಗದಿಯಾಗುವವರೆಗೂ ಸಮಸ್ಯೆಗಳು ನಿಲ್ಲುವುದಿಲ್ಲ” ಎಂದು ಕಠಿಣವಾಗಿ ಹೇಳಿತು. ವಿದ್ಯಾರ್ಥಿಗಳು ವರ್ಷಗಳ ಕಾಲ ಕಷ್ಟಪಟ್ಟು ತಯಾರಿ ನಡೆಸುತ್ತಾರೆ. ಕುಟುಂಬಗಳು ಅಪಾರ ಹಣ ಹಾಗೂ ಭಾವನೆಗಳನ್ನು ಹೂಡಿಕೆ ಮಾಡುತ್ತವೆ. ಇಂತಹ ಸಂದರ್ಭಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸಂಭವಿಸಿದರೆ ಅದು ಕೇವಲ ಪರೀಕ್ಷಾ ದೋಷವಲ್ಲ, ಯುವಕರ ಭವಿಷ್ಯಕ್ಕೆ ಹೊಡೆತವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
ಇದೇ ವೇಳೆ NTA ಪರ ವಕೀಲರು ಮರುಪರೀಕ್ಷೆಗಾಗಿ ಹಲವು ಭದ್ರತಾ ಕ್ರಮಗಳನ್ನು ಜಾರಿಗೆ ತಂದಿರುವುದಾಗಿ ಹೇಳಿದರು. ಪ್ರಶ್ನೆಪತ್ರಿಕೆ ಸಂಗ್ರಹ, ವಿತರಣೆ, ಮೇಲ್ವಿಚಾರಣೆ ಹಾಗೂ ಸೈಬರ್ ಭದ್ರತೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ ಎಂದು ತಿಳಿಸಲಾಯಿತು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಈಗ ಸಿಬಿಐ ತನಿಖೆ ನಡೆಸುತ್ತಿದೆ. ಹಲವು ರಾಜ್ಯಗಳಲ್ಲಿ ನಡೆದ ದಾಳಿಗಳಲ್ಲಿ ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಕೆಲ ಶಿಕ್ಷಣ ತಜ್ಞರು ಮತ್ತು ಪ್ರಶ್ನೆಪತ್ರಿಕೆ ತಯಾರಿಕಾ ಸಮಿತಿಯ ಸದಸ್ಯರ ಮೇಲೂ ಅನುಮಾನ ವ್ಯಕ್ತವಾಗಿದೆ.













